ದಾವಣಗೆರೆ 12.03.2024: ಮುಂಬರುವ ದಿನಗಳಲ್ಲಿ ಭಾರತವು ವಿಶ್ವಗುರು ಸ್ಥಾನ ಅಲಂಕರಿಸಲಿದೆ. ಇದಕ್ಕೆ ಪೂರಕವಾಗಿ ಶ್ರೇಷ್ಠ ಭಾರತ ನಿರ್ಮಾಣಕ್ಕೆ ದೇಶದ ಯುವ ಜನತೆ ಗುಣಮಟ್ಟದ ಶಿಕ್ಷಣ ಪಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕರೆ ನೀಡಿದರು.
ದಾವಣಗೆರೆ ವಿಶ್ವವಿದ್ಯಾಲಯದ 11ನೇ ವಾರ್ಷಿಕ ಘಟಿಕೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಿರಂತರ ಪರಿಶ್ರಮದಿಂದ ಯಶಸ್ಸು ಸಾಧ್ಯ, ಈ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡಿದ ಅನೇಕ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಕೇವಲ ಪದವಿ ಪಡೆಯುವುದು ಮಾತ್ರವಲ್ಲದೇ, ಪದವಿಯ ನಂತರ ಉತ್ತಮ ಜೀವನ ರೂಪಿಸಿಕೊಳ್ಳುವುದು ಮೂಲಕ ದೇಶಕ್ಕೆ ನಿಮ್ಮ ಕೊಡುಗೆ ನೀಡಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಶ್ರೇಷ್ಠ ಭಾರತ ನಿರ್ಮಾಣದಲ್ಲಿ ವಿಧ್ಯಾರ್ಥಿಗಳು, ಯುವಕರ ಪಾತ್ರ ಬಹು ಮುಖ್ಯವಾಗಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡುವ ಮೂಲಕ ಬಲಿಷ್ಠ ಭಾರತ ನಿರ್ಮಾಣಕ್ಕೆ ಯುವಕರು ಕೈ ಜೋಡಿಸಬೇಕು ಎಂದು ಸಲಹೆ ನೀಡಿದರು.
ಮುಂಬರುವ 25 ವರ್ಷಗಳಲ್ಲಿ ಭಾರತ ಸ್ವಾತಂತ್ರ್ಯ ಪಡೆದು 100 ವರ್ಷ ಪೂರೈಸಲಿದೆ. ಉತ್ತಮ ಸಮಾಜಕ್ಕೆ ನಿರ್ಮಾಣಕ್ಕೆ ಎಲ್ಲರೂ ಶ್ರಮಿಸಬೇಕಿದೆ. ಅದೇ ರೀತಿಯಲ್ಲಿ ಜಲ, ಭೂಮಿ, ಪ್ರಕೃತಿ ಸಂರಕ್ಷಣೆ ಕೂಡ ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.
ದಾವಣಗೆರೆ ವಿಶ್ವವಿದ್ಯಾಲಯದಿಂದ ಕಾನೂನು ಮತ್ತು ನ್ಯಾಯ ಕ್ಷೇತ್ರದಲ್ಲಿ ನ್ಯಾಯಾಧೀಶರಾದ ಗೌರವಾನ್ವಿತ ಶ್ರೀ ಶಿವರಾಜ್ ವಿ. ಪಾಟೀಲ್, ವಿಜ್ಞಾನ ಕ್ಷೇತ್ರದಲ್ಲಿ ಪ್ರೊಫೆಸರ್ ಕೆ.ಸಿದ್ದಪ್ಪ ಹಾಗೂ ಕಲೆ, ಸಾಹಿತ್ಯ ಮತ್ತು ಪರಿಸರ ಕ್ಷೇತ್ರದಲ್ಲಿ ಶ್ರೀ ಎಚ್.ಬಿ. ಮಂಜುನಾಥ್ ಅವರುಗಳ ಅತ್ಯುತ್ತಮ ಕೆಲಸಕ್ಕಾಗಿ ಗೌರವ ಪದವಿ ನೀಡಿ ಗೌರವಿಸಲಾಗಿದೆ. ಗೌರವ ಸ್ವೀಕರಿಸಿದ ಗಣ್ಯರಿಗೆ ಅಭಿನಂದಿಸುತ್ತ ಅವರ ಈ ಸಮಾಜ ಸೇವೆ ನಿರಂತರವಾಗಿರಲಿ ಎಂದು ಆಶಿಸುತ್ತೇನೆ.
ಪದವಿಗಳನ್ನು ಪಡೆದ ಎಲ್ಲಾ ವಿದ್ಯಾರ್ಥಿಗಳು ಮತ್ತು ಚಿನ್ನದ ಪದಕ ಮತ್ತು ಪ್ರಶಸ್ತಿ ವಿಜೇತರಿಗೆ ಅಭಿನಂದನೆಗಳು. ಪದವಿ ಮತ್ತು ಚಿನ್ನದ ಪದಕಗಳನ್ನು ಪಡೆದ ವಿದ್ಯಾರ್ಥಿಗಳಲ್ಲಿ ಹೆಚ್ಚಿನ ಸಂಖ್ಯೆಯ ಹುಡುಗಿಯರು ಇದ್ದಾರೆ ಎಂಬುದು ಸಂತೋಷವಾಗಿದೆ. ಹೆಣ್ಣು ಮಕ್ಕಳ ಆತ್ಮಸ್ಥೈರ್ಯ ಮತ್ತು ಸಾಮರ್ಥ್ಯದ ಬಲದಿಂದ ಮುನ್ನಡೆಯುತ್ತಿರುವುದು ಹರ್ಷ ತಂದಿದೆ ಎಂದು ಶ್ಲಾಘಿಸಿದರು.
ಇಸ್ರೋ ಮಾಜಿ ಅಧ್ಯಕ್ಷರಾದ ಎ. ಎಸ್. ಕಿರಣ್ ಕುಮಾರ್ ಮುಖ್ಯ ಅಥಿತಿಗಳಾಗಿ ಭಾಷಣ ಮಾಡಿದರು. ಘಟಿಕೋತ್ಸವದಲ್ಲಿ ಸಚಿವರಾದ ಎಂ. ಸಿ ಸುಧಾಕರ್, ಕುಲಪತಿ ಕುಂಬಾರ್ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.