ಎನ್ ಡಿ ಎ ಮೈತ್ರಿಕೂಟ ದೇಶಾದ್ಯಂತ 400ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವುದರಲ್ಲಿ ಅನುಮಾನ ಇಲ್ಲ. ಆ 400 ಸಂಸದರಲ್ಲಿ ನಾನು ಇರುತ್ತೇನೆ, ಪಿಸಿ ಮೋಹನ್ ಅವರೂ ಇರುತ್ತಾರೆ ಎಂದು ಬೆಂಗಳೂರು ಗ್ರಾಮಾಂತರ ಬಿಜೆಪಿ ಅಭ್ಯರ್ಥಿ ಡಾ. ಸಿ ಎನ್ ಮಂಜುನಾಥ್ ಅವರು ವಿಶ್ವಾಸ ವ್ಯಕ್ತಪಡಿಸಿದರು.
ಮಹಿಳಾ ಮೀಸಲು ಮಸೂದೆಯನ್ನು ಅಂದು ಪ್ರಧಾನಿ ಆಗಿದ್ದ ದೇವೇಗೌಡರು ಸಂಸತ್ತಿನಲ್ಲಿ ಮಂಡಿಸಿದರು. ಇಂದಿನ ಪ್ರಧಾನಿಗಳಾದ ಮೋದಿ ಅವರು ಅದೇ ಸಂಸತ್ತಿನಲ್ಲಿ ಮಸೂದೆಗೆ ಅಂಗೀಕಾರ ಪಡೆದು ಜಾರಿಗೂ ತಂದರು. ಇಂಥ ಜೋಡಿ ದೇಶಕ್ಕೆ, ರಾಜ್ಯಕ್ಕೆ ಒಳ್ಳೆಯದು. ಇವರಿಬ್ಬರ ಮಾರ್ಗದರ್ಶನದಲ್ಲಿ ನಾವು ಕೆಲಸ ಮಾಡುತ್ತೇವೆ ಎಂದರು.
ಮೋದಿ ಪ್ರಭಾವಶಾಲಿ ನಾಯಕರು. ಅವರ ನಾಯಕತ್ವದಲ್ಲಿ ಭಾರತ ಜಾಗತಿಕ ಮಟ್ಟದಲ್ಲಿ ಅತ್ಯಂತ ಪ್ರಭಾವಶಾಲಿ ದೇಶವಾಗಿ ಹೊರಹೊಮ್ಮಿದೆ. ಇಡೀ ಜಗತ್ತಿನಲ್ಲಿ ಭಾರತಕ್ಕೆ ಬಹು ಮಹತ್ವದ ಸ್ಥಾನ ಲಭಿಸಿದೆ ಎಂದು ಅವರು ಹೇಳಿದರು.
ಜೆಡಿಎಸ್ ನಗರ ಘಟಕದ ಅಧ್ಯಕ್ಷರಾದ ಹೆಚ್.ಎಂ.ರಮೇಶ್ ಗೌಡ ಇಬ್ಬರೂ ಅಭ್ಯರ್ಥಿಗಳನ್ನು ಬರಮಾಡಿಕೊಂಡು ಗೌರವಿಸಿದರು. ವಿಧಾನ ಪರಿಷತ್ ಸದಸ್ಯರಾದ ಟಿ.ಎ.ಶರವಣ ಅವರು ಈ ಸಂದರ್ಭದಲ್ಲಿ ಮಾತನಾಡಿದರು. ಹಿರಿಯ ನಾಯಕರಾದ ಆರ್.ಪ್ರಕಾಶ್, ರಾಜಣ್ಣ ಮುಂತಾದವರು ಉಪಸ್ಥಿತರಿದ್ದರು.